
ಸುಳ್ಯ: ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿ ಇದರ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಊರುಬೈಲು ನೇಮಕಗೊಂಡಿರುತ್ತಾರೆ. ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ತಾವರ್ಚಂದ್ ಗೆಹ್ಲೋಟ್ರವರ ನಿರ್ದೇಶನದಂತೆ, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್.ಅವರು ಆದೇಶ ನೀಡಿರುತ್ತಾರೆ. ಡಾ. ಉಜ್ವಲ್ ಊರುಬೈಲು ಅವರು ಪ್ರತಿಷ್ಠಿತ ಊರುಬೈಲು ಮನೆತನದ, ಕೊಡಗಿನ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿ.ಜಯಪ್ರಕಾಶ್ ಮತ್ತು ಲೀಲಾವತಿ ದಂಪತಿಗಳ ಹಿರಿಯ ಪುತ್ರರಾಗಿರುತ್ತಾರೆ.
ಡಾ. ಉಜ್ವಲ್ ಅವರು ಕಳೆದ 21 ವರ್ಷಗಳಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರೊಫೆಸರಾಗಿ, ವಿಭಾಗ ಮುಖ್ಯಸ್ಥರಾಗಿ ಪ್ರಸ್ತುತ ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಅಭಿವೃದ್ಧಿ ಮತ್ತು ಬೆಳವಣಿಗೆಗೆ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಇವರು ತನ್ನ ಎಂ.ಟೆಕ್. ಪದವಿಯನ್ನು ಎನ್.ಐ.ಟಿ.ಕೆ. ಸುರತ್ಕಲ್ನಲ್ಲಿ ಹಾಗೂ ಡಾಕ್ಟರೇಟ್ ಪದವಿಯನ್ನು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ ಪಡೆದಿರುತ್ತಾರೆ. ಇವರ ಸಂಶೋಧನೆಗಳಿಗೆ ಕೇಂದ್ರ ಸರಕಾರದಿಂದ ಎರಡು ಪೇಟೆಂಟ್ ಪಡೆದಿರುತ್ತಾರೆ. ಇವರ ಹೆಸರಿನಲ್ಲಿ ಕಂಪ್ಯೂಟರ್ ಸೈನ್ಸ್ಗೆ ಸಂಬಂಧಪಟ್ಟ ಅನೇಕ ರಾಷ್ಟ್ರ ಮತ್ತು ಅಂತರ್ರಾಷ್ಟ್ರೀಯ ಮಟ್ಟದ ಇನ್ಡೆಕ್ಸ್ಡ್ ಸಂಶೋಧನಾತ್ಮಕ ಗ್ರಂಥಗಳು ಪ್ರಕಟಗೊಂಡಿರುತ್ತದೆ. ಇವರು ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ರಚನಾ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಸಿಬ್ಬಂಧಿ ವರ್ಗದವರು ಅಭಿನಂದಿಸಿದ್ದಾರೆ.

