
ಜ.25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮತ್ತು ಪೂರ್ಣಗೊಂಡಿರುವ ಯೋಜನೆಗಳನ್ನು ಉದ್ಘಾಟಿಸಲು ವಿರಾಜಪೇಟೆ ಹಾಗೂ ಮಡಿಕೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸುಮಾರು ಒಂದು ಸಾವಿರ ಪೊಲೀಸರನ್ನು ಮಡಿಕೇರಿ ಮತ್ತು ವಿರಾಜಪೇಟೆ ಭಾಗದಲ್ಲಿ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರ ನಿರ್ದೇಶನದಂತೆ ಇಂದು ಮೈತ್ರಿ ಪೊಲೀಸ್ ಸಭಾಂಗಣದಲ್ಲಿ ಪೊಲೀಸರ ಸಭೆ ನಡೆಯಿತು.ಮುಖ್ಯಮಂತ್ರಿಗಳ ಆಗಮನದ ಸಂದರ್ಭ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು.

ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 500 ಪೊಲೀಸರು ಮಡಿಕೇರಿಗೆ ಆಗಮಿಸಿದ್ದಾರೆ. 2023 ರಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿದ್ದ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಬಂದಿದ್ದಾಗ ಅವರ ಕಾರಿನ ಮೇಲೆ ಮೊಟ್ಟೆ ದಾಳಿಯಾಗಿತ್ತು. ಆದ್ದರಿಂದ ಈ ಬಾರಿ ಪೊಲೀಸ್ ಬಂದೋ ಬಸ್ತ್ ಬಿಗಿಗೊಳಿಸಲಾಗಿದೆ.

