

ಉಪ್ಪಿನಂಗಡಿ ಜು.26 : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆದುಕೊಂಡು ಬಂದ ಘಟನೆ ಉಪ್ಪಿನಂಗಡಿಯಲ್ಲಿ ಜು.26ರಂದು ನಡೆದಿದೆ.



ನೇತ್ರಾವತಿ ನದಿಯ ನೀರಿನ ಮಟ್ಟ ಇಂದು ನಿನ್ನೆಗಿಂತಲೂ ಏರಿಕೆಯಾಗಿದ್ದು, 28.25 ಮೀ. ಎತ್ತರದಲ್ಲಿ ಹರಿಯುತ್ತಿತ್ತು. ನದಿಯು ರಭಸದಿಂದ ಹರಿಯುತ್ತಿದ್ದು, ಈ ನದಿಯ ಮಧ್ಯದಲ್ಲಿ ದನವೊಂದು ನದಿ ನೀರಿನಲ್ಲಿ ತೇಲಿಕೊಂಡು ಹೋಗುತ್ತಿರುವುದನ್ನು ಹಳೆಗೇಟು ಬಳಿಯ ದಡ್ಡು ಎಂಬಲ್ಲಿರುವ ಟಯರ್ ಅಂಗಡಿಯ ಮಾಲಕ ಚಂದಪ್ಪ ಅವರು ಕಂಡಿದ್ದು, ಕೂಡಲೇ ದನವು ನದಿಯಲ್ಲಿ ತೇಲಿ ಬರುತ್ತಿದ್ದ ಮಾಹಿತಿಯನ್ನು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ಬೀಡು ಬಿಟ್ಟಿರುವ ಪ್ರವಾಹ ರಕ್ಷಣಾ ತಂಡಕ್ಕೆ ನೀಡಿದರು. ತಕ್ಷಣವೇ ಕಾರ್ಯಪ್ರವೃತವಾದ ಈ ತಂಡ ತಮ್ಮಲ್ಲಿರುವ ರಬ್ಬರ್ ದೋಣಿಯ ಮೂಲಕ ಉಪ್ಪಿನಂಗಡಿ ಬಳಿಯ ನೇತ್ರಾವತಿ ನದಿ ಸೇತುವೆಯ ಬಳಿ ತೆರಳುತ್ತಿರುವಾಗ ಎದುರಿನಿಂದ ನದಿಯ ಮಧ್ಯ ಭಾಗದಲ್ಲಿ ದನವು ನೀರಿನಲ್ಲಿ ಕೊಚ್ಚಿಕೊಂಡು ಬರುವುದನ್ನು ಕಂಡು ಅಲ್ಲಿಯೇ ಕಾರ್ಯಾಚರಣೆ ನಡೆಸಿ, ದನದ ಮೂಗುದಾರಕ್ಕೆ ಹಗ್ಗವನ್ನು ಕಟ್ಟಿ ದೇವಾಲಯದ ಬಳಿ ದಡಕ್ಕೆ ತಂದು ಅದನ್ನಲ್ಲಿ ಕಟ್ಟಿ ಹಾಕಿದರು. ಗೃಹ ರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಅವರ ನೇತೃತ್ವದ ಈ ರಕ್ಷಣಾ ಕಾರ್ಯಾಚರಣ ತಂಡದಲ್ಲಿ ಎ.ಎಸ್.ಎಲ್. ಜನಾರ್ದನ, ಚರಣ್, ಸುದರ್ಶನ್, ಹಾರೀಸ್, ಸಮದ್ ಇದ್ದರು