ಬೆಂಗಳೂರು, ಮಾರ್ಚ್ 26: ಕರ್ನಾಟಕದ ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷವು 6 ವರ್ಷಗಳ ಕಾಲ ವಜಾ ಮಾಡಿದೆ.


ಪಕ್ಷದ ಶಿಸ್ತಾಚಾರ ಸಮಿತಿಯ ಆದೇಶದ ಮೇರೆಗೆ ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ.ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ನಿರಂತರ ಟೀಕೆ ಮಾಡುತ್ತಿದ್ದ ಯತ್ನಾಳ್, ಪಕ್ಷದ ನಾಯಕತ್ವದ ವಿರುದ್ಧವೂ ಸಂಘಟನೆಯ ಅಸ್ಥಿರತೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು.
ಇದರ ಹಿನ್ನೆಲೆಯಲ್ಲಿ ಶಿಸ್ತಾಚಾರ ಸಮಿತಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಪಕ್ಷದ ನಿಯಮ ಮತ್ತು ಶಿಸ್ತು ಉಲ್ಲಂಘನೆಗಾಗಿ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಗಿಡಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಯತ್ನಾಳ್, ತಮ್ಮ ವಿರುದ್ಧ ನಡೆಯುತ್ತಿರುವ ಕ್ರಮವನ್ನು ‘ಕುಟುಂಬ ರಾಜಕೀಯ ಮತ್ತು ಭ್ರಷ್ಟಾಚಾರದ ವಿರುದ್ಧವಾದ ಹೋರಾಟದ ಫಲ’ ಎಂದು ಹೇಳಿದ್ದಾರೆ. ” ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ನಾನು ಹೋರಾಟವನ್ನು ಮುಂದುವರಿಸುತ್ತೇನೆ,” ಎಂದು ಅವರು ತಿಳಿಸಿದರು.
ಯತ್ನಾಳ್ ಅವರ ವಜಾ ತೀರ್ಮಾನವು ರಾಜ್ಯದ ರಾಜಕೀಯ ವಾತಾವರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಅವರ ಮುಂದಿನ ರಾಜಕೀಯ ನಡೆ ಕುತೂಹಲಕ್ಕೆ ಕಾರಣವಾಗಿದೆ.