ರಾಮನಗರ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು

ರಾಮನಗರ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಇತ್ಯರ್ಥಪಡಿಸಿದೆ. ಈ ಅರ್ಜಿ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೀತಿರುವ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಸಲ್ಲಿಸಲಾಗಿತ್ತು.

ಪ್ರಕರಣದ ಹಿನ್ನೆಲೆ

ಮಾಜಿ ಸಂಸದ ಜಿ. ಮಾದೇಗೌಡ ಅವರು 2011 ರಲ್ಲಿ ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದ ಸರ್ವೇ ನಂ. 7, 8, 9, 10, 16, 17 ಮತ್ತು 79ನ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಲಾಗಿದೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಕುರಿತು 2014 ರ ಆಗಸ್ಟ್ 5 ರಂದು ಲೋಕಾಯುಕ್ತವು ರಾಜ್ಯ ಸರ್ಕಾರಕ್ಕೆ ತನಿಖೆ ನಡೆಸಿ, ಭೂಮಿ ಒತ್ತುವರಿ ತೆರವುಗೊಳಿಸುವಂತೆ ಆದೇಶ ನೀಡಿತು.

ಈ ಬಳಿಕ ಸಮಾಜ ಪರಿವರ್ತನಾ ಸಮುದಾಯ ಎಂಬ ಸಂಸ್ಥೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಿತು. ಹೈಕೋರ್ಟ್ 2020ರ ಜನವರಿ 14ರಂದು ತೀರ್ಪು ನೀಡಿದ್ದು, ಸರ್ಕಾರವು ಲೋಕಾಯುಕ್ತ ವರದಿ ಆಧಾರಿಸಿ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿತು.

ಆದರೆ ಸರ್ಕಾರ ಈ ಆದೇಶವನ್ನು ಜಾರಿ ಮಾಡದ ಕಾರಣ, ಸಮಾಜ ಪರಿವರ್ತನಾ ಸಮುದಾಯವು ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿತು.

ಎಚ್.ಡಿ. ಕುಮಾರಸ್ವಾಮಿ ಅವರ ಅರ್ಜಿ ಮತ್ತು ಸುಪ್ರೀಂ ಕೋರ್ಟ್ ತೀರ್ಪು

ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ನಡೆದ 21 ಆದೇಶಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅವರು ತಮ್ಮ ಅರ್ಜಿಯಲ್ಲಿ 2021ರ ಮಾರ್ಚ್ 3ರಂದು ಲೋಕಾಯುಕ್ತ ವರದಿ ಸಲ್ಲಿಸಲಾಗಿದೆ, ಆದ್ದರಿಂದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಬೇಡ ಎಂದು ವಾದಿಸಿದರು.

ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳು ಪಂಕಜ್ ಮಿತ್ತಲ್ ಮತ್ತು ಎಸ್.ವಿ.ಎನ್. ಭಟ್ಟಿ ಅವರಿದ್ದ ಪೀಠ ಈ ಅರ್ಜಿಯನ್ನು ಪರಿಶೀಲಿಸಿ, “ನ್ಯಾಯಾಂಗ ನಿಂದನೆ ಪ್ರಕರಣವು ಅನಗತ್ಯವಾಗಿ ನಡೆಯುತ್ತಿದೆ ಎಂದು ಹೈಕೋರ್ಟ್‌ಗೆ ಮನವರಿಕೆ ಮಾಡಿಸಬಹುದು” ಎಂದು ಸೂಚನೆ ನೀಡಿದೆ. ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ.

ಎಚ್.ಡಿ. ಕುಮಾರಸ್ವಾಮಿ ಪರವಾಗಿ ಹಿರಿಯ ವಕೀಲರು ಮುಕುಲ್ ರೋಹಟ್ಗಿ, ನಿಶಾಂತ್ ಎ.ವಿ., ಹರ್ಷ ತ್ರಿಪಾಠಿ ಮತ್ತು ಬಾಲಾಜಿ ಶ್ರೀನಿವಾಸನ್ ಹಾಜರಿದ್ದರು. ಸಮಾಜ ಪರಿವರ್ತನಾ ಸಮುದಾಯದ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ ವಾದಿಸಿದರು.

ಮುಂದಿನ ಹೆಜ್ಜೆಗಳು

ಈ ಪ್ರಕರಣವು ಈಗ ಕರ್ನಾಟಕ ಹೈಕೋರ್ಟ್‌ನಲ್ಲಿ ಮುಂದುವರೆಯಲಿದೆ, ಕುಮಾರಸ್ವಾಮಿ ಅವರು ತಮ್ಮ ವಾದ ಮಂಡಿಸಬಹುದು. ಹೈಕೋರ್ಟ್ ನ್ಯಾಯಾಂಗ ನಿಂದನೆ ಅರ್ಜಿ ಮುಂದುವರೆಯಬೇಕೇ ಅಥವಾ ಮುಕ್ತಾಯಗೊಳಿಸಬೇಕೇ ಎಂಬುದನ್ನು ನಿರ್ಧರಿಸಲಿದೆ. ರಾಜ್ಯ ರಾಜಕೀಯ ಹಾಗೂ ಸರ್ಕಾರಿ ಭೂಮಿ ಅತಿಕ್ರಮಣ ಪ್ರಕರಣದಲ್ಲಿ ಈ ತೀರ್ಪು ಮಹತ್ವದ ತೀರ್ಮಾನವಾಗಬಹುದು.

ರಾಷ್ಟ್ರೀಯ