
ಬೆಂಗಳೂರು: ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಎಂಬ ಮನವಿಯನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆ ಮುಂದೂಡಲಾಗಿದೆ.


ನ್ಯಾಯಾಲಯದ ಆದೇಶ ಮತ್ತು ವಿಚಾರಣೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಐರಿನ್ ಸೇರಿದಂತೆ 100 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರ ಏಕಸದಸ್ಯ ಪೀಠ ನಡೆಸಿತು. ಅರ್ಜಿದಾರರ ಪರ ವಕೀಲರು ತಮ್ಮ ವಾದವನ್ನು ಮಂಡಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ನೀಡಿ, ಈ ಪ್ರಕರಣದ ವಿಚಾರಣೆ ಮುಂದೂಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಳೆದ 25 ವರ್ಷಗಳಿಂದ ಕೇಂದ್ರ ಸರ್ಕಾರ ಪ್ರಾಯೋಜಿತ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ, ಅಂಗನವಾಡಿ ಕಾರ್ಯಕರ್ತೆಯರಿಗೆ ₹11,500 ಮತ್ತು ಸಹಾಯಕಿಯರಿಗೆ ₹7,500 ಗೌರವಧನ ನೀಡಲಾಗುತ್ತಿದೆ. ಆದರೆ, ಅವರು ಸರ್ಕಾರಿ ನೌಕರರಂತೆಯೇ ಸೇವೆ ಸಲ್ಲಿಸುತ್ತಿದ್ದರೂ, ಸರ್ಕಾರ ಅವರ ಸೇವೆಯನ್ನು ಖಾಯಂಗೊಳಿಸದೆ, ಕನಿಷ್ಠ ವೇತನಕ್ಕೂ ಕಡಿಮೆ ಗೌರವಧನ ನೀಡುತ್ತಿದೆ.
ಇತ್ತೀಚೆಗೆ ಗುಜರಾತ್ ಹೈಕೋರ್ಟ್ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಸರ್ಕಾರಿ ನೌಕರರ ಸೇವೆಯಂತೆ ಪರಿಗಣಿಸುವಂತೆ ಕೇಂದ್ರ ಮತ್ತು ಗುಜರಾತ್ ಸರ್ಕಾರಗಳಿಗೆ ಸೂಚನೆ ನೀಡಿತ್ತು. ಅದೇ ಮಾದರಿಯಲ್ಲಿ ಕರ್ನಾಟಕ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಾ ಅಂಗನವಾಡಿ ಸಿಬ್ಬಂದಿಯ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ಸೇವೆ ಖಾಯಂಗೊಳಿಸಲು ಸಲ್ಲಿಸಿದ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ. ಅವರ ಸೇವೆಯನ್ನು ಪೂರ್ವಾನ್ವಯವಾಗಿ ಖಾಯಂಗೊಳಿಸುವ ಜೊತೆಗೆ, ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ಹೈಕೋರ್ಟ್ ನೀಡಿರುವ ಈ ಆದೇಶಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೇಗೆ ಪ್ರತಿಕ್ರಿಯಿಸುತ್ತವೆ ಎಂದು ಕಾದು ನೋಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ತೀರ್ಪು ಹೊರಬರುವ ನಿರೀಕ್ಷೆ ಇದೆ. ಈ ತೀರ್ಪು ನೂರಾರು ಅಂಗನವಾಡಿ ಕಾರ್ಯಕರ್ತೆಯರ ಭವಿಷ್ಯವನ್ನು ನಿರ್ಧರಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರ ಇದಕ್ಕೆ ಏನೆಲ್ಲಾ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಮುಂದೆ ತಿಳಿಯಬೇಕಾಗಿದೆ.
ಇದಕ್ಕೂ ಮುನ್ನ 2023 ರಲ್ಲಿ ಕರ್ನಾಟಕ ಹೈಕೋರ್ಟ್ ಅಂಗನವಾಡಿ ಕಾರ್ಯಕರ್ತೆಯರ ಆರ್ಥಿಕ ಸೌಲಭ್ಯಗಳನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ನ್ಯಾಯಾಲಯವು ಅಂಗನವಾಡಿ ಕಾರ್ಯಕರ್ತೆಯರು ನೀಡುತ್ತಿರುವ ಅಮೂಲ್ಯ ಸೇವೆಯನ್ನು ಗುರುತಿಸಿ, ಅವರ ಆರ್ಥಿಕ ತೊಂದರೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತ್ತು.
ನೂತನ ಬಜೆಟ್ನಲ್ಲಿ ಅಂಗನವಾಡಿಗಾಗಿ ಇರುವ ಯೋಜನೆಗಳು
ಕರ್ನಾಟಕ ಸರ್ಕಾರವು ಮಾರ್ಚ್ 7, 2025ರಂದು ಮಂಡಿಸಿದ್ದ 2025-26ನೇ ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗಾಗಿ ಹಲವಾರು ಸೌಲಭ್ಯಗಳನ್ನು ಘೋಷಿಸಿದೆ.
- ಗೌರವ ಧನ ಏರಿಕೆ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹1,000 ಅಂಗನವಾಡಿ ಸಹಾಯಕಿಯರಿಗೆ ಪ್ರತಿ ತಿಂಗಳು ₹750 ಹೆಚ್ಚಳ ನೀಡಲಾಗುವುದು ಎಂದು ಘೋಷಿಸಿದೆ. ಈ ಹೆಚ್ಚಳದಿಂದ ರಾಜ್ಯದ 1.5 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಸಿಬ್ಬಂದಿಗೆ ಪ್ರಯೋಜನವಾಗಲಿದ್ದು, ಸುಮಾರು 37 ಲಕ್ಷ ಮಕ್ಕಳಿಗೆ ಉತ್ತಮ ಸೇವೆ ಒದಗಿಸಲು ನೆರವಾಗಲಿದೆ.
- ಸಕ್ಷಮ ಅಂಗನವಾಡಿ ಯೋಜನೆ: ಅಂಗನವಾಡಿಗಳ ಸಂಪೂರ್ಣ ಅಭಿವೃದ್ಧಿಗಾಗಿ ಸಕ್ಷಮ ಅಂಗನವಾಡಿ ಯೋಜನೆಯನ್ನು ಪ್ರಾರಂಭಿಸಿರುವ ರಾಜ್ಯ ಸರ್ಕಾರವು ಈ ಯೋಜನೆಯಡಿ 17,454 ಅಂಗನವಾಡಿ ಕೇಂದ್ರಗಳನ್ನು ಸುಧಾರಿಸಲು ₹175 ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ಈ ಮೂಲಕ ಪ್ರಾಥಮಿಕ ಶೈಕ್ಷಣಿಕ ಮತ್ತು ಮಕ್ಕಳ ಸಂರಕ್ಷಣೆ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ.