ಬೆಂಗಳೂರು: ಶಿಸ್ತು ಪಾಲಿಸಬೇಕಾದ ಗುರುವೇ ಶಿಷ್ಯೆಯ ಪಾಲಿಗೆ ಕಂಟಕವಾದ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿ ಕಿರುಕುಳ ನೀಡಿದ ಆರೋಪದ ಮೇಲೆ ನೆಲಮಂಗಲದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ಈ ಘಟನೆ ನಡೆದಿದೆ. ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದಾನೆ ಎನ್ನಲಾಗಿದೆ. ಉಪನ್ಯಾಸಕನ ಈ ಅಸಭ್ಯ ವರ್ತನೆಯಿಂದ ಆಕ್ರೋಶಗೊಂಡ ಸಹಪಾಠಿಗಳು ಮತ್ತು ಇತರೆ ವಿದ್ಯಾರ್ಥಿಗಳು ಆತನನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ.
ವೈರಲ್ ಆಯ್ತು ವಿಡಿಯೋ:
ವಿದ್ಯಾರ್ಥಿಗಳು ಉಪನ್ಯಾಸಕನ ಮೇಲೆ ದಾಳಿ ಮಾಡುತ್ತಿದ್ದಂತೆ ಆತ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಈ ವೇಳೆ ನಡೆದ ಗದ್ದಲ ಮತ್ತು ವಿದ್ಯಾರ್ಥಿಗಳು ಉಪನ್ಯಾಸಕನಿಗೆ ಥಳಿಸುತ್ತಿರುವ ದೃಶ್ಯಗಳನ್ನು ಯಾರೋ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಪೊಲೀಸ್ ವಶಕ್ಕೆ ಆರೋಪಿ:
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಉಪನ್ಯಾಸಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಘಟನೆ ನಡೆದು ಇಷ್ಟು ಸಮಯ ಕಳೆದರೂ ಕಾಲೇಜು ಆಡಳಿತ ಮಂಡಳಿಯು ಈವರೆಗೆ ಅಧಿಕೃತವಾಗಿ ಯಾವುದೇ ದೂರು ದಾಖಲಿಸಿಲ್ಲ ಎನ್ನಲಾಗಿದೆ.
ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡಬೇಕಾದ ಶಿಕ್ಷಕನೇ ಇಂತಹ ಕೆಲಸಕ್ಕೆ ಕೈಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಸದ್ಯ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

