
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿಯ ದಿನವಾದ ಮಂಗಳವಾರ ದೇವರ ಕಿರುಷಷ್ಠಿ ರಥೋತ್ಸವವು ನಡೆಯಿತು.

ರಥಾರೋಹಣದ ಬಳಿಕ ದೇವಳದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು.

ಈ ಸಂದರ್ಭ ಸುಡುಮದ್ದುಗಳನ್ನು ಸಿಡಿಸಿ ಬಣ್ಣದ ಚಿತ್ತಾರ ಮೂಡಿಸಲಾಯಿತು. ದೇವಳದ ಹೊರಾಂಗಣದಲ್ಲಿ ಪಲ್ಲಕ್ಕಿ ಉತ್ಸವ, ಬಂಡಿ ಉತ್ಸವ ನಡೆಯಿತು. ಸಂಗೀತಮಯ ಉತ್ಸವದ ಸುತ್ತು ನೆರವೇರಿತು.

ತಮಿಳುನಾಡು, ಕೇರಳ, ಮೈಸೂರು, ಶ್ರೀರಂಗಪಟ್ಟಣದ ಕಲಾವಿದರು ಕಲಾ ಸೇವೆ ಸಲ್ಲಿಸಿದರು. ಕೇರಳ ಶೈಲಿಯ ಚೆಂಡೆ ವಾದನವೂ ಇತ್ತು.50 ಭಕ್ತರಿಂದ ಎಡೆಸ್ನಾನ ಸೇವೆ: ಮಂಗಳವಾರ ದೇವಳದಲ್ಲಿ 50 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.
ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸಿದರು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ರಾಮ್ ಸುಳ್ಳಿ, ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್ ಪ್ರಸಾದ್, ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ವನಜಾ ವಿ.ಭಟ್, ಲೋಕೇಶ್ ಮುಂಡುಕಜೆ, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್. ಭಾಗವಹಿಸಿದ್ದರು.
