
ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್ ಗೆ ಹೋಗಿದ್ದರು ಎನ್ನಲಾಗಿದೆ. ಸುಮಾರು 5 ರಿಂದ ಆರು ಜನರ ತಂಡ ರಾತ್ರಿ 11 ರ ಸುಮಾರಿಗೆ ನಗರದ ವಾಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ ವೆಂದು ಹೇಳಲಾಗಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
