
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ (ಆರ್.ವಿ.ಎಸ್.ಯು)ದ ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ .ಯವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರುಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಸರಕಾರಕ್ಕೆ
ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾಪನೆಯನ್ನು ತಯಾರು ಮಾಡಿ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಸಲ್ಲಿಸಲು ಡಾ. ರೇಣುಕಾ ಪ್ರಸಾದ್ ಕೆ.ವಿ ಯವರ ಪ್ರಯತ್ನದಿಂದ ಸರಕಾರಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಈ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರಾದ ಡಾ.ಉಜ್ವಲ್ ಊರುಬೈಲು ಮತ್ತು ಉದ್ದೇಶಿತ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯ ವಿಶೇಷ ಅಧಿಕಾರಿ ಡಾ. ಜಗನ್ನಾಥ ರೆಡ್ಡಿ ಸೇವೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರಕಾರ ಈ ಪ್ರಸ್ತಾವಕ್ಕೆ ಅನುಮೋದನೆ ನೀಡುವ ಮೂಲಕ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ದೊರೆತಂತಾಗಿದೆ. ಸರಕಾರದ ಈ ಕಾರ್ಯಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಸಿ.ಎನ್, ಕಾರ್ಯದರ್ಶಿಗಳಾದ ಕೋನಪ್ಪರೆಡ್ಡಿ, ಉಪಾಧ್ಯಕ್ಷರಾದ ಡಾ| ರೇಣುಕಾ ಪ್ರಸಾದ್ ಕೆ.ವಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಹರ್ಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿರುತ್ತಾರೆ.

