ರಾಜ್ಯ

ಮಡಿಕೇರಿಯಲ್ಲಿ 70 ನೇ ವನ್ಯಜೀವಿ ಸಪ್ತಾಹ: ಗಮನ ಸೆಳೆದ ಕಾಲ್ನಡಿಗೆ ಜಾಗೃತಿ ಜಾಥಾ :ಅರಣ್ಯ, ವನ್ಯಜೀವಿಗಳ ಸಂರಕ್ಷಣೆಗೆ ಕಾಳಜಿ ಅಗತ್ಯ:ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕರೆ

 

ಮಡಿಕೇರಿ, ಅ.3 :  ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, 

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.)

ಹಾಗೂ ವಿವಿಧ ಶಾಲಾ- ಕಾಲೇಜು

 ಸಹಯೋಗದೊಂದಿಗೆ ಗುರುವಾರ ( ಅ.3 ರಂದು ) ಜಿಲ್ಲಾ ಕೇಂದ್ರವಾದ ಮಡಿಕೇರಿ ನಗರದಲ್ಲಿ 

  “*ವನ್ಯಜೀವಿಗಳೊಂದಿಗೆ ಸಹಬಾಳ್ವೆ*” ಎಂಬ ಧ್ಯೇಯ ವಾಕ್ಯದೊಂದಿಗೆ 70ನೇ ವನ್ಯಜೀವಿ ಸಪ್ತಾಹ-2024ರ ಅಂಗವಾಗಿ 

ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು  “ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ (Walk for Wildlife)” 

ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

       ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ, ಪ್ರತಿಯೊಬ್ಬರೂ ನಿಸರ್ಗದ ನಿಯಮಗಳನ್ನು ಪರಿಪಾಲಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ಪರಿಸರ, ಪ್ರಕೃತಿ, ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಪ್ರತಿಯೊಬ್ಬರೂ  ಕಾಳಜಿ ಹೊಂದಬೇಕು ಎಂದರು.

ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಿದಾಗ ಮಾತ್ರ  ಪ್ರಕೃತಿ, ಪರಿಸರ ಉಳಿಯಲು ಸಾಧ್ಯ.ಇದರಿಂದ ಪರಿಸರ ಸಮತೋಲನ ಕಾಯ್ದುಕೊಳ್ಳಬಹುದು.

 ‘ಅರಣ್ಯಕ್ಕೆ ನಾವು ಯಾವುದೇ ಹಾನಿಯನ್ನು ಉಂಟು ಮಾಡದೇ ಸಸ್ಯ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಪ್ರಧಾನ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಸಲಹೆ ನೀಡಿದರು.

ಪ್ರತಿಯೊಂದು  ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಸಂರಕ್ಷಿಸಬೇಕು ಎಂದು ಹೇಳಿದರು.

    ಜಿಲ್ಲಾಧಿಕಾರಿ ವೆಂಕಟರಾಜ್ ಮಾತನಾಡಿ, ಅರಣ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ವನ್ಯಜೀವಿ ಸಪ್ತಾಹ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಉಳಿವಿಗೆ ನಿರಂತರ ಪ್ರಯತ್ನ‌ ಅಗತ್ಯ ಎಂದರು.

ಅರಣ್ಯ ಇಲಾಖೆಯು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ವಹಿಸಿರುವ ವಿಶೇಷ ಕಾಳಜಿ ಶ್ಲಾಘನೀಯವಾದುದು. ಈ ಕಾಲ್ನಡಿಗೆ ಜಾಥಾವು ಜನರಲ್ಲಿ ಅರಣ್ಯ, ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು.

ಕೊಡಗು ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ  ಮನೋಜ್ ಕುಮಾರ್ ತ್ರಿಪಾಠಿ ಮಾತನಾಡಿ, ಪ್ರತಿಯೊಬ್ಬರೂ ಅರಣ್ಯ ಇಲಾಖೆಯ ಇಂತಹ ಜನ ಜಾಗೃತಿ ಕಾರ್ಯಕ್ರಮಕ್ಕೆ ಸಹಕರಿಸಬೇಕು ಎಂದರು.

 ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಮಹತ್ವ 

ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ

ಪ್ರತಿಜ್ಞಾ ವಿಧಿ ಬೋಧಿಸಿದ ರಾಷ್ಟ್ರೀಯ ಹಸಿರು ಪಡೆಯ  ಜಿಲ್ಲಾ ನೋಡಲ್ ಅಧಿಕಾರಿಯೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಕೂಡುಮಂಗಳೂರು

ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ

 ಟಿ.ಜಿ.ಪ್ರೇಮಕುಮಾರ್,  ಇಂದು ನಾವು ಅರಣ್ಯ ಮತ್ತು ವನ್ಯಜೀವಿಗಳ ಜೊತೆಯೇ ಬಾಳುವುದನ್ನು ಕಲಿಯಬೇಕು. ಆಗ ಮಾತ್ರ ಪ್ರಕೃತಿ ಮತ್ತು ಪರಿಸರ ಸಮತೋಲನದಿಂದ ಇರಲು ಸಾಧ್ಯ. ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ನಾವು ಪಣತೊಡಬೇಕು ಎಂದರು.ಮಡಿಕೇರಿ ವನ್ಯಜೀವಿ ವಿಭಾಗದ ಡಿಸಿಎಫ್ ಕೆ.ಎ.ನೆಹರು  ವನ್ಯಜೀವಿ ಸಪ್ತಾಹ ಆಚರಣೆಯ ಉದ್ದೇಶ ತಿಳಿಸಿದರು.

ಜಾಥಾದಲ್ಲಿ ಭಾಗವಹಿಸಿದ್ದ ಡಿಡಿಪಿಐ ಸಿ.ರಂಗಧಾಮಪ್ಪ ಮಾತನಾಡಿ, ಮುಂದಿನ ಪೀಳಿಗೆಗಾಗಿ ನಾವು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.

       ಜಾಥಾದಲ್ಲಿ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್, ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತ ಘೋಷವಾಕ್ಯಗಳನ್ನು ಹೇಳಿದರು. ವನ್ಯಜೀವಿ ಸಪ್ತಾಹ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದ  ಸಿಸಿಎಫ್ ಮನೋಜ್ ಕುಮಾರ್ ತ್ರಿಪಾಠಿ,  ಜಿ.ಪಂ.ಸಿಇಓ  ಆನಂದ್ ಪ್ರಕಾಶ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನಾರ್ವಡೆ, ವಿರಾಜಪೇಟೆ ಪ್ರಾದೇಶಿಕ ವಿಭಾಗದ ಡಿಸಿಎಫ್, ಎನ್.ಎಚ್.ಜಗನ್ನಾಥ್, ಅರಣ್ಯ ಸಂಚಾರಿ ದಳದ ಡಿಸಿಎಫ್ ಸೈಯದ್ ಅಹಮದ್ ಶಾ ಹುಸೇನ್ , ಡಿಡಿಪಿಐ ಸಿ.ರಂಗಧಾಮಪ್ಪ, ಭಾರತ್ ಸ್ಕೌಟ್ಸ್, ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ

ಅವರು ವಿದ್ಯಾರ್ಥಿಗಳೊಂದಿಗೆ 4 ಕಿ.ಮೀ.ಕಾಲ್ನಡಿ ಜಾಥಾದಲ್ಲಿ ಕ್ರಮಿಸಿ  ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು.ವನ್ಯಜೀವಿ ವಿಭಾಗದ ಎಸಿಎಫ್  ಶ್ರೀನಿವಾಸ ನಾಯಕ್,  ಎಸಿಎಫ್ ಗಳಾದ ಕೆ.ಪಿ.ಗೋಪಾಲ್, ಎ.ಎ.ಗೋಪಾಲ್, 

ಪುಷ್ಪಗಿರಿ‌ ವನ್ಯಜೀವಿ ವಿಭಾಗದ ಆರ್‌ಎಫ್ ಓ ಕೆ.ಕೋಟ್ರೇಶ್ ,ಆರ್. ಎಫ್.ಓ.ಗಳಾದ ಶಮ,ಮರಿಸ್ವಾಮಿ, ರತನ್ ಕುಮಾರ್,  ಪೂಜಾಶ್ರೀ, ಗಂಗಾಧರ್, ಶೈಲೇಂದ್ರ,  

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ 

ಸಹ ಕಾರ್ಯದರ್ಶಿ ಬೊಳ್ಳಜಿರ ಬಿ ಅಯ್ಯಪ್ಪ, ಜಿಲ್ಲಾ ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ,

ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್,

ಗೈಡ್ಸ್ ತರಬೇತಿ ಆಯುಕ್ತೆ ಮೈಥಲಿರಾವ್, ಗೈಡ್ಸ್ ಶಿಕ್ಷಕಿ ಪ್ರೇಮ,ಜಾಥಾದಲ್ಲಿ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್, ಹೆಬ್ಬಾಲೆ ಪ್ರೌಢಶಾಲೆಯ  ಶಿಕ್ಷಕರಾದ ಸಿ.ಡಿ.ಲೋಕೇಶ್, 

ಭೋಜೇಗೌಡ, ಶಿಕ್ಷಕರ ಸೊಸೈಟಿ ನಿರ್ದೇಶಕ ಎಸ್.ಆರ್.ಶಿವಲಿಂಗ,

ಅರಣ್ಯ ಇಲಾಖೆಯ ಅಧಿಕಾರಿಗಳು, ಆರ್. ಎಫ್.ಓ.ಗಳು, ಡಿ.ಆರ್. ಎಫ್.ಓ.ಗಳು, ಅರಣ್ಯ ಫಾರೆಸ್ಟ್ ಗಳು, ಅರಣ್ಯ ವೀಕ್ಷಕರು,ಸಿಬ್ಬಂದಿ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ನಾಗರಿಕರು ಭಾಗವಹಿಸಿದ್ದರು

Leave a Response

error: Content is protected !!